ಸಮಗ್ರ ನ್ಯೂಸ್: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಭರ್ಜರಿ ಜಯ ದಾಖಲಿಸಿದ್ದಾರೆ. ಈ ಗೆಲುವಿನ ಮೂಲಕ ಬಿಹಾರದ ಸಾಂಪ್ರದಾಯಿಕ ರಾಜಕೀಯ ಪಕ್ಷಗಳಾದ ಬಿಜೆಪಿ ಮತ್ತು ಆರ್ಜೆಡಿಗೆ ಕಿಶೋರ್ ಪ್ರಬಲ ಎಚ್ಚರಿಕೆ ನೀಡಿದ್ದಾರೆ.
ಬಂಕಿಪುರ ಕ್ಷೇತ್ರದಲ್ಲಿ ನಡೆದ ಕಠಿಣ ಪೈಪೋಟಿಯಲ್ಲಿ ಪ್ರಶಾಂತ್ ಕಿಶೋರ್ ಅವರು ಬಿಜೆಪಿಯ ನೀರಜ್ ಕುಮಾರ್ ಅವರನ್ನು 19,324 ಮತಗಳ ಬೃಹತ್ ಅಂತರದಿಂದ ಸೋಲಿಸಿದ್ದಾರೆ. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಕಿಶೋರ್ ಒಟ್ಟು 64,151 ಮತಗಳನ್ನು ಪಡೆದರೆ, ಬಿಜೆಪಿಯ ನೀರಜ್ ಕುಮಾರ್ 44,827 ಮತಗಳನ್ನು ಗಳಿಸಿ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಬಿಹಾರದ ಪ್ರಬಲ ಪಕ್ಷ ಎನಿಸಿಕೊಂಡಿರುವ ಲಾಲೂ ಪ್ರಸಾದ್ ಯಾದವ್ ಅವರ ಆರ್ಜೆಡಿ ಅಭ್ಯರ್ಥಿ ರೇಖಾ ಕುಮಾರಿ ಕೇವಲ 14,273 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು.
ಜನ ಸುರಾಜ್ ಪಕ್ಷ ಸ್ಥಾಪಿಸಿದ ನಂತರ ಪ್ರಶಾಂತ್ ಕಿಶೋರ್ ಅವರು ಎದುರಿಸಿದ ಮೊದಲ ನೇರ ಚುನಾವಣೆ ಇದಾಗಿದ್ದು, ಮೊದಲ ಯತ್ನದಲ್ಲೇ ಯಶಸ್ಸು ಕಂಡಿದ್ದಾರೆ. ಬಂಕಿಪುರ ಕ್ಷೇತ್ರವು 1995 ರಿಂದಲೂ ಬಿಜೆಪಿ ಪಾಲಿಗೆ ಅತ್ಯಂತ ಸುರಕ್ಷಿತ ಕ್ಷೇತ್ರವಾಗಿತ್ತು. ಈ ಹಿಂದೆ ಪಾಟ್ನಾ ಪಶ್ಚಿಮ ಎಂದು ಕರೆಯಲ್ಪಡುತ್ತಿದ್ದ ಈ ಕ್ಷೇತ್ರದಲ್ಲಿ ಕೇಸರಿ ಪಕ್ಷ ಎಂದಿಗೂ ಸೋತಿರಲಿಲ್ಲ. ಬಿಜೆಪಿ ರಾಷ್ಟ್ರೀಯ ನಾಯಕರ ಪ್ರಭಾವವಿರುವ ಈ ಕ್ಷೇತ್ರದಲ್ಲಿ ಸೋಲನ್ನು ಅನುಭವಿಸಿರುವುದು ಪಕ್ಷಕ್ಕೆ ದೊಡ್ಡ ಆಘಾತ ನೀಡಿದೆ.








