ಸುಳ್ಯ: ಮನೆಯಿಂದ ಕಾಣೆಯಾಗಿದ್ದ ವಿವಾಹಿತ ಮಹಿಳೆ ಹಾಗೂ ಅವರ ಮೂರು ವರ್ಷದ ಪುತ್ರಿಯನ್ನು ಬೆಳ್ಳಾರೆ ಪೊಲೀಸರು ಉತ್ತರ ಕರ್ನಾಟಕದ ಹುಬ್ಬಳ್ಳಿಯಲ್ಲಿ ಪತ್ತೆಹಚ್ಚಿ, ಸುರಕ್ಷಿತವಾಗಿ ಮನೆಗೆ ಕರೆತಂದು ಕುಟುಂಬಸ್ಥರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ತಿಗೆ ಗ್ರಾಮದ ಕುಂಟಿಕಾನ ನಿವಾಸಿ ರಮ್ಯಾ ಎ.ವಿ. (29) ಹಾಗೂ ಅವರ ಪುತ್ರಿ ಪ್ರಾಪ್ತಿ (3) ಆಗಸ್ಟ್ 10ರಿಂದ ಮನೆಯಿಂದ ಕಾಣೆಯಾಗಿದ್ದರು. ಈ ಕುರಿತು ಕುಟುಂಬಸ್ಥರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರು ಸ್ವೀಕರಿಸಿದ ಪೊಲೀಸರು ಮಹಿಳೆ ಹಾಗೂ ಮಗುವಿನ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದು, ತನಿಖೆಯ ವೇಳೆ ಇಬ್ಬರೂ ಹುಬ್ಬಳ್ಳಿಯಲ್ಲಿ ಇರುವ ಮಾಹಿತಿ ಲಭ್ಯವಾಗಿದೆ. ಬಳಿಕ ಹುಬ್ಬಳ್ಳಿಗೆ ತೆರಳಿದ ಪೊಲೀಸರು ಮಹಿಳೆ ಮತ್ತು ಮಗುವನ್ನು ಪತ್ತೆಹಚ್ಚಿ ಬೆಳ್ಳಾರೆಗೆ ಕರೆತಂದಿದ್ದಾರೆ. ನಂತರ ಇಬ್ಬರನ್ನೂ ಸುರಕ್ಷಿತವಾಗಿ ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ.
ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಈರಯ್ಯ ದೂಂತೂರು ಅವರ ಮಾರ್ಗದರ್ಶನದಲ್ಲಿ ಎಎಸ್ಐ ರವೀಂದ್ರ ಹಾಗೂ ಹೆಡ್ ಕಾನ್ಸ್ಟೇಬಲ್ ಉದಯ ಗೌಡ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


















