ಸಮಗ್ರ ನ್ಯೂಸ್: ಬೆಳ್ತಂಗಡಿಯ ಪಣಕಜೆ ಮಸೀದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಉಜಿರೆ ನಿವಾಸಿ ರಿನ್ಸ್ ಶಿಬಿ (24) ಎಂದು ಗುರುತಿಸಲಾಗಿದೆ.
ಮಂಗಳವಾರ ಸಂಜೆ ಪಣಕಜೆ ಮಸೀದಿ ಬಳಿ ತೆರಳುತ್ತಿದ್ದಾಗ ಟೆಂಪೋಗೆ ರಿನ್ಸ್ ಚಲಾಯಿಸುತ್ತಿದ್ದ ಬೈಕ್ ಹಿಂಬದಿಯಿಂದ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ರಿನ್ಸ್ನನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮೃತ ರಿನ್ಸ್ ಶಿಬಿ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದು, ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


















